ವರದಿ /ಚಿತ್ರ: ರವಿರಾಜ್ ಕಾವೂರು
ಬೆಂಗಳೂರು: ರಾಜ್ಯದ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಂಪೂರ್ಣವಾಗಿ ಆಧುನೀಕರಿಸಲು ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಲಾಖೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಇಲಾಖೆಯನ್ನು ಸಜ್ಜುಗೊಳಿಸಲು ಸಮಗ್ರ ಕ್ರಿಯಾ ಯೋಜನೆ (ರೋಡ್ಮ್ಯಾಪ್) ರೂಪಿಸುವಂತೆ ಆದೇಶಿಸಿದರು.
ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ನಿರ್ಧಾರಗಳು ಹೀಗಿವೆ:
ವಸತಿ ಸೌಕರ್ಯ ಶೇ. 50 ಹೆಚ್ಚಳ: ಸಿಬ್ಬಂದಿಯ ಹಿತದೃಷ್ಟಿಯಿಂದ ವಸತಿ ಗೃಹಗಳ ಸಂಖ್ಯೆಯನ್ನು ಶೇಕಡಾ 50 ರಷ್ಟು ಹೆಚ್ಚಿಸಲು ಸಚಿವರು ಪ್ರಸ್ತಾವನೆ ಕೋರಿದ್ದಾರೆ.490 ಹೊಸ ಹುದ್ದೆಗಳ ಭರ್ತಿ: ಇಲಾಖೆಯಲ್ಲಿ ಖಾಲಿ ಇರುವ 490 ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.
ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ: ಹೊಸ ನೇಮಕಾತಿಯಲ್ಲಿ ಕಲಂ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಸೌಲಭ್ಯ ಒದಗಿಸಲು ಸೂಚಿಸಲಾಗಿದೆ.
ಸ್ವಂತ ಕಟ್ಟಡಗಳ ನಿರ್ಮಾಣ: ಹುಬ್ಬಳ್ಳಿ ಸೇರಿದಂತೆ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ರಾಜ್ಯದ 219 ಠಾಣೆಗಳ ಸ್ಥಿತಿಗತಿ ಪರಿಶೀಲಿಸಿ, ಸ್ವಂತ ಕಟ್ಟಡ ನಿರ್ಮಿಸಲು ಪಟ್ಟಿ ಸಿದ್ಧಪಡಿಸಲು ಆದೇಶಿಸಲಾಗಿದೆ.
LPG ಸೋರಿಕೆ ತರಬೇತಿ ಮತ್ತು ಸಿಎಸ್ಆರ್ ನಿಧಿ: ಎಲ್ಪಿಜಿ ಗ್ಯಾಸ್ ಸೋರಿಕೆ ತಡೆಯಲು ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುವುದು. ಇದಕ್ಕೆ ತಗಲುವ ವೆಚ್ಚವನ್ನು ಅನಿಲ ಕಂಪನಿಗಳ ಸಿಎಸ್ಆರ್ (CSR) ನಿಧಿಯಿಂದ ಬಳಸಿಕೊಳ್ಳಲು ಯೋಜಿಸಲಾಗಿದೆ.
SDRF ಮತ್ತು ಹೋಂಗಾರ್ಡ್ಸ್ ಬಲವರ್ಧನೆ: ನೈಸರ್ಗಿಕ ವಿಕೋಪಗಳನ್ನು ಎದುರಿಸಲು ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ಸಾಮರ್ಥ್ಯ ಹೆಚ್ಚಿಸಲು ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಯ ಗೌರವ ಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದ್ದಾರೆ.ರಾಜ್ಯದ ಕೈಗಾರಿಕಾ ಪ್ರಗತಿ ಹಾಗೂ ಬೆಳೆಯುತ್ತಿರುವ ಜನಸಂಖ್ಯೆಗೆ ತಕ್ಕಂತೆ ಅಗ್ನಿಶಾಮಕ ದಳವನ್ನು ಅತ್ಯಾಧುನಿಕ ಉಪಕರಣಗಳು ಮತ್ತು ವಾಹನಗಳೊಂದಿಗೆ ಸಜ್ಜುಗೊಳಿಸುವುದು ಸರ್ಕಾರದ ಮುಖ್ಯ ಉದ್ದೇಶ ಎಂದು ಸಚಿವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಸಭೆಯಲ್ಲಿ ಇಲಾಖೆಯ ಉನ್ನತ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
